ಪುತ್ತೂರು, ಜುಲೈ 8: ಕೋಡಿಂಬಾಡಿ ಮಹಿಷಮರ್ಧಿನಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ನಿರಂಜನ್ ರೈ ಮಠಂತಬೆಟ್ಟು ಅವರು ಮಂಗಳವಾರ ಪುತ್ತೂರು ತಾಲೂಕು ಕಚೇರಿಯಲ್ಲಿ ಹೃದಯಾಘಾತಕ್ಕೊಳಗಾಗಿ ನಿಧನರಾದರು.
ಲಭ್ಯ ಮಾಹಿತಿಯ ಪ್ರಕಾರ, ತಾಲೂಕು ಕಚೇರಿಗೆ ತೆರಳಿದ್ದ ವೇಳೆ ಅವರು ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ನಡೆದಿದ್ದರೂ, ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.
ನಿರಂಜನ್ ರೈ ಅವರು ಕೋಡಿಂಬಾಡಿ ಮಹಿಷಮರ್ಧಿನಿ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಷ್ಟೇ ಅಲ್ಲದೇ, ಕಂಬಳ ಸಮಿತಿಯಲ್ಲಿಯೂ ಸಕ್ರಿಯರಾಗಿದ್ದರು. ಕಾಂಗ್ರೆಸ್ ಪಕ್ಷದ ಮುಖಂಡರಾಗಿಯೂ ಗುರುತಿಸಿಕೊಂಡಿದ್ದರು. ಅವರ ಅಕಾಲಿಕ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜಕೀಯ, ಸಾಮಾಜಿಕ ಹಾಗೂ ಧಾರ್ಮಿಕ ವಲಯಗಳಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.
ಅವರ ನಿಧನಕ್ಕೆ ವಿವಿಧ ಗಣ್ಯರು, ರಾಜಕೀಯ ನಾಯಕರು, ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಸಂತಾಪ ಸೂಚಿಸಿದ್ದು, ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.
0 ಕಾಮೆಂಟ್ಗಳು